
ಶಿವಮೊಗ್ಗ: ಶಿವಮೊಗ್ಗದಲ್ಲಿ ಜೂನ್ 1ರಂದು ಶಾಲಾ ಆರಂಭ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಈ ಶೈಕ್ಷಣಿಕ ವರ್ಷದಲ್ಲಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತಿದ್ದು, ರಾಜ್ಯಾದ್ಯಂತ ಸುಮಾರು 52 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಶಿವಮೊಗ್ಗ ಸೇರಿದಂತೆ ರಾಜ್ಯದ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ನಿರ್ಮಾಣಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದು, ಪ್ರತಿ ಶಾಲೆಗೆ ಕನಿಷ್ಠ 3.5 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು. ಕೆಪಿಎಸ್ ಪರಿಕಲ್ಪನೆ ದೇಶದಲ್ಲೇ ಮಾದರಿಯಾಗಿದ್ದು, ಅದರ ಯಶಸ್ಸನ್ನು ಗಮನಿಸಿ ತೆಲಂಗಾಣ ಸರ್ಕಾರವೂ ಇದೇ ಮಾದರಿಯನ್ನು ಅಳವಡಿಸಿಕೊಳ್ಳಲು ಮುಂದಾಗಿದ್ದು, ಅಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಶಿಕ್ಷಣ ಇಲಾಖೆಯಲ್ಲಿದ್ದ ಹಲವು ನ್ಯೂನತೆಗಳನ್ನು ಸರಿಪಡಿಸಲಾಗಿದ್ದು, ಶಿಕ್ಷಣದ ಗುಣಮಟ್ಟವೂ ಸುಧಾರಿಸಿದ್ದು, ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಪ್ರಮಾಣ ಶೇ.6.4ರಷ್ಟು ಹೆಚ್ಚಳಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.





