
ಮೈಸೂರು: ಆರ್ಎಸ್ಎಸ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿರುವ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಆರ್ಎಸ್ಎಸ್ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಯಾವುದೇ ಸಂಘಟನೆ ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆರ್ಎಸ್ಎಸ್ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ, ಅದು ವಾಸ್ತವದಲ್ಲಿ ಬಿಜೆಪಿಯ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಘಟನೆ ಎಂದು ಆರೋಪಿಸಿದರು, ಪ್ರತಿಯೊಂದು ಚುನಾವಣೆಯಲ್ಲೂ ಕೆಲಸ ಮಾಡುವ ಸಂಘಟನೆ ದೇಶದ ಕಾನೂನುಗಳ ವ್ಯಾಪ್ತಿಗೆ ಒಳಪಡಲೇಬೇಕು ಎಂದರು. ಆರ್ಎಸ್ಎಸ್ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಹಣಕಾಸು ವ್ಯವಹಾರಗಳನ್ನು ಹೊಂದಿದ್ದು, ಅದರ ಲೆಕ್ಕಪತ್ರಗಳನ್ನು ಸಾರ್ವಜನಿಕವಾಗಿ ನೀಡಬೇಕು ಎಂದು ಆಗ್ರಹಿಸಿದರು. ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗಬೇಕು, ‘ಹಿಂದೂ ಧರ್ಮ’ದ ಹೆಸರಿನಲ್ಲಿ ಯಾವುದೇ ಸಂಘಟನೆ ತನ್ನ ಚಟುವಟಿಕೆಗಳನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ನೋಂದಣಿ ಕುರಿತು ಕೇಳಿರುವ ಪ್ರಶ್ನೆ ಕಾನೂನುಬದ್ಧವಾಗಿದ್ದು, ಆರ್ಎಸ್ಎಸ್ ತಮ್ಮನ್ನು ನೋಂದಾಯಿಸಿಕೊಂಡು ದೇಶದ ಕಾನೂನುಗಳನ್ನು ಪಾಲಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದರು.




