ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿದ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಇದನ್ನು ‘ಕರಾಳ ದಿನ’ ಎಂದು ಕರೆದಿದ್ದು, ಸಂವಿಧಾನಬದ್ಧವಾಗಿ ಕರ್ತವ್ಯ ನಿರ್ವಹಿಸಿದ ರಾಜ್ಯಪಾಲರಿಗೆ ಅಗೌರವ ತೋರಿರುವುದು ನೇರ ಗೂಂಡಾಗಿರಿಯಾಗಿದೆ ಎಂದು ಕಿಡಿಕಾರಿದರು. ರಾಜ್ಯಪಾಲರು ಭಾಷಣ ಓದದೇ ಹೊರಡುವುದಕ್ಕೂ ಸಂವಿಧಾನಾತ್ಮಕ ಅಧಿಕಾರವಿದ್ದು, ಇದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ ಅವರು, ಸದನವನ್ನು ಕಾಂಗ್ರೆಸ್ ಪಕ್ಷ ಕರಾಳ ರೀತಿಯಲ್ಲಿ ನಡೆಸಿದೆ ಎಂದು ಆರೋಪಿಸಿದರು. ಈ ಘಟನೆಗೆ ಕಾರಣರಾದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಗೌರವ ತೋರಿದವರನ್ನು ಸದನದಿಂದ ಹೊರಹಾಕಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪತ್ರ ನೀಡುವುದಾಗಿ ಅಶೋಕ್ ತಿಳಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದು, ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಸದನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿ, ಬಹುಮತದ ದರ್ಪದಲ್ಲಿ ಸರ್ಕಾರ ದಬ್ಬಾಳಿಕೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು.
