ಚಿಕ್ಕಮಗಳೂರು: ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್ಗೆ ತೆರಳುತ್ತಿದ್ದ ಸುಮಾರು ೪೮ ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಮುಂಜಾನೆ ೫.೩೦ಗೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
